ಶುಕ್ರವಾರ ದೇಶವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ
ಕಳೆದ ಅನೇಕ ದಿನಗಳಿಂದ ರಾಜ್ಯದಾದ್ಯಂತ ಅನೇಕ ಮುಷ್ಕರಗಳು ನಡೆಯುತ್ತಲೇ ಇವೆ. ಇದರ ಹಿನ್ನೆಲೆಯಲ್ಲಿಯೇ ನಾಳೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ ನಡೆಯಲಿದೆ.
ಕೇಂದ್ರ ಸರ್ಕಾರದ ಜನವಿರೋಧಿ ಬ್ಯಾಂಕಿಂಗ್ ನೀತಿ ಖಂಡಿಸಿ ಸರ್ಕಾರಿ ಮತ್ತು ಖಾಸಗಿ ವಲಯದ ಹತ್ತು ಲಕ್ಷಕ್ಕೂ ಹೆಚ್ಚು ಬ್ಯಾಂಕ್ ನೌಕರರು ಜುಲೈ ಶುಕ್ರವಾರ (ಜು. 29) ದೇಶದಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆ (ಯುಎಫ್ ಬಿಯು) ಅಡಿಯಲ್ಲಿ ಬರುವ 9 ಬ್ಯಾಂಕ್ ನೌಕರರ ಸಂಘಟನೆಗಳು ಮುಷ್ಕರದಲ್ಲಿ ಭಾಗವಹಿಸಲಿವೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಸೇರಿದಂತೆ ಗ್ರಾಮೀಣ ಮತ್ತು ಸಹಕಾರಿ ಬ್ಯಾಂಕುಗಳ ಖಾಸಗೀಕರಣ ಮತ್ತು ವಿಲೀನ ಕೈಬಿಡಬೇಕು. ಬ್ಯಾಂಕಿಂಗ್ ವಲಯದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ನೀಡಬಾರದು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಲ್ಲಿ ಖಾಸಗಿ ಬಂಡವಾಳ ಪ್ರಮಾಣ ಹೆಚ್ಚಿಸುವುದು ಸೇರಿದಂತೆ ಇನ್ನಿತರ ಹಲವು ಬೆಡಿಕೆಗಳನ್ನು ಮುಂದಿಟ್ಟುಕೊಂಡು ಈ ಮುಷ್ಕರ ನಡೆಸಲಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ತಿಳಿಸಿದೆ.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿರುವ ಮೈಸೂರು ಬ್ಯಾಂಕಿನಲ್ಲಿ ಬೆಳಿಗ್ಗೆ ೧೦ ಗಂಟೆಗೆ ಯುಎಫ್ ಬಿಯು ನೇತೃತ್ವದಲ್ಲಿ ಸಾಂಕೇತಿಕವಾಗಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.