'ಕಲ್ಲಿದ್ದಲು ಗಣಿಗಾರಿಕೆ ಹರಾಜಿನಿಂದ 2.8 ಲಕ್ಷಕ್ಕೂ ಹೆಚ್ಚು ಉದ್ಯೋಗಗಳ ಅವಕಾಶ'
ನವದೆಹಲಿ, ಜೂನ್ 18: ಕಲ್ಲಿದ್ದಲು ಗಣಿಗಳನ್ನ ವಾಣಿಜ್ಯ ಉದ್ದೇಶಕ್ಕಾಗಿ ಹರಾಜು ಹಾಕುವ ಪ್ರಕ್ರಿಯೆಯನ್ನು ಐತಿಹಾಸಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಶ್ಲಾಘಿಸಿದ್ದಾರೆ.
ಈ ಐತಿಹಾಸಿಕ ನಿರ್ಧಾರ ಭಾರತವನ್ನು ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡುವುದಲ್ಲದೆ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ರಾಜ್ಯಗಳಿಗೆ ಬೃಹತ್ ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ಭಾರಿ ಆದಾಯವನ್ನು ನೀಡುತ್ತದೆ ಎಂದು ಹೇಳಿದರು. ಸರಣಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಅಭಿನಂದಿಸಿದ್ದಾರೆ.
ಕಲ್ಲಿದ್ದಲು ಗಣಿ ಹರಾಜಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಆತ್ಮನಿರ್ಭರ ಭಾರತ್ ಅಭಿಯಾನದ ದೂರದೃಷ್ಟಿಗೆ ಅನುಗುಣವಾಗಿ ಗುರುವಾರ ವಾಣಿಜ್ಯ ಉದ್ದೇಶದ ಗಣಿಗಾರಿಕೆಗಾಗಿ 41 ಕಲ್ಲಿದ್ದಲು ಗಣಿಗಳನ್ನು ಹರಾಜು ಹಾಕುವ ಪ್ರಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
2.8 ಲಕ್ಷಕ್ಕೂ ಹೆಚ್ಚು ಉದ್ಯೋಗ
ಕಲ್ಲಿದ್ದಲು ಗಣಿಗಳನ್ನು ಹರಾಜು ಹಾಕುವ ಮೋದಿ ಸರ್ಕಾರದ ಈ ನಿರ್ಧಾರವು 2.8 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತದೆ. 33,000 ಕೋಟಿ ಮೌಲ್ಯದ ಬಂಡವಾಳ ಹೂಡಿಕೆಯನ್ನು ಆಕರ್ಷಿಸುತ್ತದೆ ಮತ್ತು ರಾಜ್ಯ ಸರ್ಕಾರಗಳಿಗೆ ವಾರ್ಷಿಕ 20,000 ಕೋಟಿ ಆದಾಯವನ್ನು ನೀಡುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಭ್ರಷ್ಟಾಚಾರ ಮುಕ್ತ ಮತ್ತು ಸ್ವಾವಲಂಬಿ ಭಾರತ
ಈ ಮಹತ್ವದ ನಿರ್ಧಾರಕ್ಕಾಗಿ ಮತ್ತು ಗಣಿ ಹಂಚಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಾತ್ರಿಪಡಿಸಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಪ್ರಲ್ಹಾದ್ ಜೋಶಿ ಅವರಿಗೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ಸಮೃದ್ಧ, ಭ್ರಷ್ಟಾಚಾರ ಮುಕ್ತ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಮೋದಿ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.
ವಿಶ್ವದ ನಾಲ್ಕನೇ ಅತಿದೊಡ್ಡ ಕಲ್ಲಿದ್ದಲು ನಿಕ್ಷೇಪ
ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಕಲ್ಲಿದ್ದಲು ನಿಕ್ಷೇಪವನ್ನು ಹೊಂದಿದೆ. ಎರಡನೇ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ. ಆದರೂ ದೇಶವು ತನ್ನದೇ ಆದ ವಿದ್ಯುತ್ ಉತ್ಪಾದನೆಯ ಅಗತ್ಯಗಳಿಗಾಗಿ ಕಲ್ಲಿದ್ದಲನ್ನು ಹೆಚ್ಚು ಆಮದು ಮಾಡಿಕೊಳ್ಳುವವರಲ್ಲಿ ಒಂದಾಗಿದೆ. ಈ ವಲಯದ ಸಂಪೂರ್ಣ ಸಾಮರ್ಥ್ಯವನ್ನು ಅನ್ಲಾಕ್ ಮಾಡದಿರುವ ಹಿಂದಿನ ಸರ್ಕಾರಗಳು ಮಾಡಿದ ತಪ್ಪನ್ನು ತಮ್ಮ ಸರ್ಕಾರ ಮಾಡುವುದಿಲ್ಲ ಎಂದು ಪ್ರಧಾನೆ ನರೇಂದ್ರ ಮೋದಿ ಹೇಳಿದ್ದಾರೆ.
ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ
ದೇಶವು ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಭಾರತವನ್ನು ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಗಳನ್ನಾಗಿ ಮಾಡಲು, ಇಂದು ಒಂದು ಪ್ರಮುಖ ಹೆಜ್ಜೆ ಎಂದು ಮೋದಿ ಗಣಿ ಹರಾಜು ಪ್ರಕ್ರಿಯೆಯಲ್ಲಿ ಹೇಳಿದ್ದಾರೆ.