ವಿಜಯಪುರ, ಮಾರ್ಚ್ 13: ವಿಜಯಪುರ ಜಿಲ್ಲೆಯಲ್ಲಿ ಸುಜ್ಲಾನ್ ನಿಂದ ₹30 ಸಾವಿರ ಕೋಟಿ, ರೆನೈಸಾನ್ಸ್ನಿಂದ ₹6 ಸಾವಿರ ಕೋಟಿ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಬಸವನಾಡಿನಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ನಮ್ಮ ಸರ್ಕಾರ ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್ ಮತ್ತು ಸೌರವಿದ್ಯುತ್ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್ ಮತ್ತು ರೆನೈಸಾನ್ಸ್ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಇಂದು ಚರ್ಚೆ ನಡೆಸಿದೆ ಎಂದು ಎಕ್ಸ್ನಲ್ಲಿ ತಿಳಿಸಿದ್ದಾರೆ.

'ಸುಜ್ಲಾನ್' ಪವನ ವಿದ್ಯುತ್ ಕ್ಷೇತ್ರಕ್ಕೆ ಅಗತ್ಯವಿರುವ ಕಂಬಗಳು ಮತ್ತು ಬೃಹತ್ ಬ್ಲೇಡುಗಳ ಉತ್ಪಾದನೆಗೆ ಖ್ಯಾತಿಗಳಿಸಿದ್ದು, ವಿಜಯಪುರದಲ್ಲಿ ಹಂತಹಂತವಾಗಿ ಬೃಹತ್ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ. ಮೊದಲ ಹಂತದಲ್ಲಿ ಕಂಪನಿಯು ಬ್ಲೇಡುಗಳ ತಯಾರಿಕಾ ಘಟಕ ಆರಂಭಿಸಲಿದ್ದು, 100 ಎಕರೆ ಜಮೀನನ್ನು ಕೇಳಿದೆ. ಕಂಪನಿಯು 5,000 ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಲಿದ್ದು, ಇದು ದೇಶದಲ್ಲೇ 2ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕವಾಗಿರಲಿದೆ.
ರೆನೈಸಾನ್ಸ್ ಕಂಪನಿಯಿಂದ 6,000 ಸಾವಿರ ಕೋಟಿ ರೂ. ಹೂಡಿಕೆ
ಸೌರ ಫಲಕಗಳ (ಸೋಲಾರ್ ಪ್ಯಾನೆಲ್ಸ್) ತಯಾರಿಕೆಗೆ ಬೇಕಾಗುವ ಬಿಡಿ ಭಾಗಗಳ ಉತ್ಪಾದನೆಗೆ ಹೆಸರಾಗಿರುವ ರೆನೈಸಾನ್ಸ್ ಸೋಲಾರ್ & ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿ ಕೂಡ ವಿಜಯಪುರದಲ್ಲಿ ತನ್ನ ಘಟಕ ಆರಂಭಿಸಲು 6,000 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದೆ. ಈ ಸಂಬಂಧ ಕಂಪನಿಯ ಸಿಇಒ ಶ್ರೀ ಮಿಲಿಂದ್ ಕುಲಕರ್ಣಿ ಅವರೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಯಿತು.
ಈ ಕಂಪನಿ ಕೂಡ ಸುಮಾರು 100 ಎಕರೆಯಲ್ಲಿ ಕಾರ್ಯಾರಂಭಿಸಲು ಮುಂದೆ ಬಂದಿದೆ. ಆರಂಭದಲ್ಲಿ 2,500 ಕೋಟಿ ರೂ. ಹಣ ಹೂಡಲಿದ್ದು, 5,000 ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು (ಕ್ರಿಸ್ಟಲ್ ಗ್ರೋತ್ & ವೇಫರಿಂಗ್ ಯೂನಿಟ್) ಆರಂಭಿಸಲಿದೆ.
2025ರ ಕೊನೆಯ ಹೊತ್ತಿಗೆ ತನ್ನ ವಾಣಿಜ್ಯ ಚಟುವಟಿಕೆ ಆರಂಭಿಸಲಿದೆ. ಸುಮಾರು 1 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. 2030ರ ಹೊತ್ತಿಗೆ ಕಂಪನಿಯು ತನ್ನ ಘಟಕವನ್ನು 20 ಸಾವಿರ ಮೆಗಾವ್ಯಾಟ್ ಮಟ್ಟಕ್ಕೆ ಕೊಂಡೊಯ್ಯುವ ಗುರಿ ಹೊಂದಿದೆ. ಆಗ 3,000ಕ್ಕೂ ಹೆಚ್ಚು ಜನರಿಗೆ ಇಲ್ಲಿ ಉದ್ಯೋಗ ಸಿಗಲಿದೆ.
ಸುಜ್ಲಾನ್ ಸಮೂಹದ ಸಿಇಒ ಶ್ರೀ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯ ಸಿಇಒ ಶ್ರೀ ಮಿಲಿಂದ್ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು. ಕೆಐಎಡಿಬಿ ಸಿಇಒ ಡಾ.ಮಹೇಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


Click it and Unblock the Notifications