ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ 'ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ- 2025' ಕ್ಕೆ ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿದೆ.
ಹೌದು ಕರ್ನಾಟದಲ್ಲಿ ಅದರಲ್ಲೂ ರಾಜ್ಯದ ಕೆಲ ಭಾಗದಲ್ಲಿ ಸಾರ್ವಜನಿಕರನ್ನು ಮೈಕ್ರೋ ಫೈನಾನ್ಸ್ ದುಃಸ್ವಪ್ನವಾಗಿ ಕಾಡಿತ್ತು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚಾದ ಕಾರಣ, ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದರು. ಇನ್ನು ಕೆಲವರು ವಸೂಲಿಗಾರರ ಕಾಟಕ್ಕೆ ಊರು ಬಿಟ್ಟು ಹೋಗಿದ್ದಾರೆ. ಇದರಿಂದ ಸರ್ಕಾರವು ಎಚ್ಚೆತ್ತುಕೊಂಡು ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ರೂಪುರೇಷೆ ಹಾಕಿಕೊಂಡು ಇದಕ್ಕೆ ಸಂಪುಟದಲ್ಲಿ ಒಪ್ಪಿಗೆಯನ್ನು ಪಡೆದಿತ್ತು.

ಕಳೆದೊಂದು ವಾರದ ಹಿಂದೆಯೇ ರಾಜ್ಯ ಸರ್ಕಾರದಿಂದ ಸಚಿವ ಸಂಪುಟದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿಗೊಳಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದರು ಹೀಗಾಗಿ ಅನೇಕರಿಗೆ ನಿರಾಸೆ ಉಂಟಾಗಿತ್ತು. ಇದೀಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಆರು ತಿಂಗಳುಗಳ ಕಾಲ ಈ ಸುಗ್ರೀವಾಜ್ಞೆ ಜಾರಿಯಲ್ಲಿರಲಿದೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಸುಗ್ರೀವಾಜ್ಞೆಯ ಉದ್ದೇಶ ಅತ್ಯುತ್ತಮ ಆಗಿದ್ದರೂ ಕಾನೂನು ದೃಷ್ಟಿಯಿಂದ ಮತ್ತು ಅದು ಬೀರಬಹುದಾದ ಸಾಮಾಜಿಕ ಪರಿಣಾಮದ ಕುರಿತು ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಬೇಕು ಎಂದು ಹೇಳಿರುವುದು ಮಾತ್ರವಲ್ಲದೇ ಇನ್ನಿತರ ಹಲವು ಸಲಹೆ ನೀಡಿದ್ದಾರೆ.
ಆರ್ಬಿಐ ನೋಂದಾಯಿತ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಗ್ಗೆ ತಪ್ಪು ಗ್ರಹಿಕೆ ಅಥವಾ ದುರ್ಬಳಕೆ ಮಾಡಿಕೊಂಡರೆ, ಗ್ರಾಹಕರು ಮತ್ತು ಸಂಸ್ಥೆಗಳು ಇಬ್ಬರೂ ತೊಂದರೆಗೆ ಒಳಗಾಗಬಹುದು. ಕಾನೂನುಬದ್ಧ ಮತ್ತು ನಿಜವಾದ ಸಾಲದಾತರು ಬಡ್ಡಿ ಮತ್ತು ಅಸಲು ವಸೂಲಿ ಮಾಡಲು ತೊಂದರೆ ಆಗಬಾರದು. ಆರ್ ಬಿಐ ಅಡಿ ನೋಂದಾಯಿತ,ಸಹಕಾರಿ,ಸಣ್ಣ ಹಣಕಾಸು ಸಂಸ್ಥೆಗಳಿಗೆ ವ್ಯಾಪಾರ ವ್ಯವಹಾರಕ್ಕೆ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸುವ ಸಂದರ್ಭದಲ್ಲಿ ಈ ಮೇಲಿನ ಅಂಶಗಳನ್ನು ಸೇರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಈ ಎಲ್ಲ ಅಂಶಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕು ಇತ್ಯಾದಿ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಮುಂದಿನ ಅಧಿವೇಶನದಲ್ಲಿ ಅದರ ಸಾಧಕ ಮತ್ತು ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ನಿರ್ಧಾರ ಮಾಡಬೇಕಿದೆ.
ಈ ಸುಗ್ರೀವಾಜ್ಞೆಯು ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಅವಕಾಶ ನೀಡುತ್ತದೆ. ಅಲ್ಲದೆ, ಸಾಲಗಾರರ ಹಿತಾಸಕ್ತಿಯನ್ನು ಕಾಪಾಡುವ ನಿಬಂಧನೆಗಳನ್ನು ಒಳಗೊಂಡಿರುತ್ತದೆ.
ಈ ಸುಗ್ರೀವಾಜ್ಞೆಯು ಜಾರಿಗೆ ಬಂದ ನಂತರ, ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ನೀಡುವಾಗ ಮತ್ತು ಮರುಪಾವತಿ ಮಾಡುವಾಗ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಇದು ಸಾಲಗಾರರಿಗೆ ಹೆಚ್ಚಿನ ರಕ್ಷಣೆ ನೀಡುವ ಮೂಲಕ, ಅವರ ಹಿತಾಸಕ್ತಿಯನ್ನು ಕಾಪಾಡಲು ಸಹಾಯ ಮಾಡುತ್ತದೆ.
ಒಟ್ಟಾರೆ ಸರ್ಕಾರದ ಈ ಕ್ರಮವು ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿಯಂತ್ರಿಸುವಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.


Click it and Unblock the Notifications