ಲಾಕ್ಡೌನ್ ಪರಿಣಾಮ: ಕರ್ನಾಟಕ ಪ್ರವಾಸೋದ್ಯಮಕ್ಕೆ 15 ಸಾವಿರ ಕೋಟಿ ರು ನಷ್ಟ
ಬೆಂಗಳೂರು, ಜೂನ್ 17: ಸ್ಟಾರ್ಟ್ ಅಪ್ ಯೋಜನೆಯಡಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಅಭಿವೃದ್ಧಿ ಪಡಿಸಿರುವ ನೂತನ ಕಾರ್ವಾನ್ ಗಳಿಗೆ (ಮಿನಿ ಬಸ್) ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಬುಧವಾರ ಚಾಲನೆ ನೀಡಿದರು.
ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಆದರೆ, ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ಈ ಸನ್ನಿವೇಶದಲ್ಲಿ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
4,759 ಕೋಟಿ ರುಪಾಯಿಯ ಕೊರತೆ ಬಜೆಟ್ ಮಂಡಿಸಿದ ಯಡಿಯೂರಪ್ಪ
ರಾಜ್ಯದ ಜಿ.ಡಿ.ಪಿ.ಗೆ ಪ್ರವಾಸೋದ್ಯಮದ ಕೊಡುಗೆ ಶೇಕಡಾ 14 ರಷ್ಟಿದ್ದು, ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಯಡಿಯೂರಪ್ಪ ಹೇಳಿದರು. ಕೋವಿಡ್-19 ನಿಂದಾಗಿ ಪ್ರವಾಸೋದ್ಯಮ ವಲಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದೆ. ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸೂಚನೆ ನೀಡಿದ್ದೇನೆ ಎಂದರು.
ಕೊರೊನಾ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಕಾರವಾನ್ (ಮಿನಿ ಬಸ್) ಪ್ರವಾಸೋದ್ಯಮಕ್ಕೆ ಚಾಲನೆ ನೀಡಲಾಗಿದೆ. ಕಾರವಾನ್ ಪ್ರವಾಸೋದ್ಯಮ ಪರಿಕಲ್ಪನೆಯು ಸ್ವತಂತ್ರ ತಿರುಗಾಟದ ಅನುಭವಕ್ಕಾಗಿ ಅತ್ಯಂತ ಜನಪ್ರಿಯವಾಗಿದೆ. ಪ್ರವಾಸದ ಅವಧಿಯಲ್ಲಿ ಸೂಕ್ತ ರಕ್ಷಣೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಾರವಾನನಲ್ಲಿ ಪ್ರವಾಸ ಕೈಗೊಳ್ಳುವುದು ಸೂಕ್ತವಾಗಿದೆ. ಕಾರವಾನ್ಗಳ ನಿಲುಗಡೆಗೆ ಪ್ರಾಥಮಿಕ ಹಂತದಲ್ಲಿ ರಾಜ್ಯ ಸರ್ಕಾರದ ಸಂಸ್ಥೆಗಳಾದ ಅರಣ್ಯ ವಸತಿ ಮತ್ತು ವಿಹಾರಧಾಮ ಹಾಗೂ ಕೆ.ಎಸ್.ಟಿ.ಡಿ.ಸಿ ಘಟಕಗಳ ಆವರಣದಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು. ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್ಗಳನ್ನು ನಿಯೋಜಿಸಲಾಗುವುದು.