10 ದಿನಗಳಲ್ಲಿ ಹೊಸ ಕೈಗಾರಿಕಾ ನೀತಿಯ ಕರಡು ಸಚಿವ ಸಂಪುಟದ ಮುಂದೆ
ಬೆಂಗಳೂರು: ಮುಂದಿನ 10 ದಿನಗಳಲ್ಲಿ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಒತ್ತು ನೀಡಿರುವಂತಹ ಹೊಸ ಕೈಗಾರಿಕಾ ನೀತಿಯ ಕರಡನ್ನು ಸಚಿವ ಸಂಪುಟದ ಮುಂದಿಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆ ಸಿ ಸಿ ಐ) ಆಯೋಜಿಸಿದ್ದ ಅಂತರಾಷ್ಟ್ರೀಯ ಎಮ್ ಎಸ್ ಎಂ ಇ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಹಲವಾರು ಕ್ರಾಂತಿಕಾರಿ ಕಾಯ್ದೆಗಳನ್ನು ಜಾರಿಗೊಳಿಸಿದ್ದೇವೆ. ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ರಾಜ್ಯದಲ್ಲಿ ಮಾಡುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿದ್ದ ಕರ್ನಾಟಕ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಇಂತಹ ಬದಲಾವಣೆಗಳು ರಾಜ್ಯವನ್ನು ದೇಶದಲ್ಲೆ ನಂ 1 ಕೈಗಾರಿಕಾ ಸ್ನೇಹೀ ರಾಜ್ಯವನ್ನಾಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿವೆ.
ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೈಗಾರಿಕೆಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಅವಕಾಶ ಮಾಡಿಕೊಡುವ ಹೊಸ ಕೈಗಾರಿಕಾ ನೀತಿಯ ಕರಡನ್ನು ಇನ್ನು ಕೇವಲ 10 ದಿನಗಳಲ್ಲಿ ಸಚಿವ ಸಂಪುಟದ ಮುಂದೆ ತರಲಿದ್ದೇವೆ. ಈ ನೂತನ ಕೈಗಾರಿಕಾ ನೀತಿಯಲ್ಲಿ ನಾವು ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿ ಪಡಿಸಲು ಒತ್ತು ನೀಡುತ್ತಿದ್ದೆವೆ. ಅಲ್ಲದೆ, ಹಿಂದುಳಿದ ತಾಲ್ಲೂಕುಗಳು ಹಾಗೂ ಹೋಬಳಿಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕೈಗಾರಿಕೋದ್ಯಮಿಗಳು ಹೆಚ್ಚಿನ ಒಲವು ತೋರಿಸಲು ಇದು ಮಾಡಿಕೊಡಲಿದೆ. ಇದರಿಂದಾಗಿ ಬೆಂಗಳೂರು ನಗರದ ಮೇಲೆ ಇರುವ ಒತ್ತಡವನ್ನು ಕಡಿಮೆ ಮಾಡಲಿದೆ. ಅಲ್ಲದೆ, ರಾಜ್ಯದ ಎರಡನೇ ಹಂತದ ನಗರಗಳು ಅದರಲ್ಲೂ ಉತ್ತರ ಕರ್ನಾಟಕದ ವಲಸಿಗ ಕಾರ್ಮಿಕರುಗಳಿಗೆ ತಮ್ಮ ತಮ್ಮ ಜಿಲ್ಲಾ ಕೇಂದ್ರಗಳು ಅಥವಾ ಜಿಲ್ಲೆಗಳಲ್ಲೇ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.
ರಾಜ್ಯ ಸರಕಾರ ಭೂ ಸುಧಾರಣೆ, ಕಾರ್ಮಿಕ ನೀತಿಗಳಲ್ಲಿ ಬದಲಾವಣೆ ಮಾಡಿದ್ದು ಮುಂದಿನ ದಿನಗಳಲ್ಲಿ ರಾಜ್ಯ ನಂ 1 ಕೈಗಾರಿಕಾ ಸ್ನೇಹಿ ರಾಜ್ಯವಾಗಲಿದೆ ಎಂದು ಹೇಳಿದರು. ಇನ್ನು ಮುಂದಿನ ದಿನಗಳಲ್ಲಿ ರಾಜ್ಯದ ಕೈಗಾರಿಕಾ ಸಂಸ್ಥೆಗಳು ನೀಡಿರುವ ಸಲಹೆಗಳನ್ನು ಅಳವಡಿಸಿಕೊಳ್ಳುವ ಭರವಸೆಯನ್ನು ನೀಡಿದರು.