ಬೆಂಗಳೂರು: ಕೊರೊನಾವೈರಸ್ ಹಾವಳಿಯಿಂದ ಎಲ್ಲ ಕ್ಷೇತ್ರಗಳ ಸಂಕಷ್ಟಕ್ಕೆ ತುತ್ತಾಗಿವೆ. ಅದರಲ್ಲೂ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ತೀವ್ರ ಸಂಕಷ್ಟಕ್ಕೆ ತುತ್ತಾಗಿವೆ.
ಈ ಎಂಎಸ್ಎಇಗಳಿಗೆ ಇಂತಹ ಸಂಕಷ್ಟದ ಸಮಯದಲ್ಲಿ ನೆರವು ಒದಗಿಸಲು ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್ ಅಡಿ ಸುಮಾರು ಮೂರು ಲಕ್ಷ ಕೋಟಿ ರುಪಾಯಿಯನ್ನು ಘೋಷಣೆ ಮಾಡಿದೆ.
ಈಗ ಇದೇ ರೀತಿಯ ನೆರವನ್ನು ಕರ್ನಾಟಕ ರಾಜ್ಯ ಸರ್ಕಾರವೂ ಒದಗಿಸಿ ಎಂಎಸ್ಎಂಇಗಳನ್ನು ರಕ್ಷಿಸಬೇಕು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.
ಬದುಕುಳಿಯುವುದೇ ಕಷ್ಟವಾಗಿದೆ
ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ತಕ್ಷಣ ಕ್ರಮ ಕೈಗೊಳ್ಳಬೇಕು
ರಾಜ್ಯ ಸರ್ಕಾರ MSME ಗಳಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚುಮಂದಿ MSME ಉದ್ದಿಮೆದಾರರು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳು ಎಂದು ಟ್ವೀಟ್ ಮಾಡಿದ್ದಾರೆ.
ತುಸು ಉಸಿರಾಡಲು ಸಾಧ್ಯವಾಗುತ್ತದೆ
ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು
ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.


Click it and Unblock the Notifications