ಬೆಂಗಳೂರು,ಸೆಪ್ಟಂಬರ್ 19: ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ವಾರ್ಷಿಕ 5 ಸಾವಿರ ಕೋಟಿ.ರೂ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಕರ್ನಾಟಕದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಸೆಪ್ಟೆಂಬರ್ 17 ರಂದು ಮಂಗಳವಾರ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಬೆಂಬಲ ನೀಡಲು ಕೇಂದ್ರ ಸರ್ಕಾರದಿಂದ ವಾರ್ಷಿಕ 5,000 ಕೋಟಿ ರೂ.ಗಳ ಅನುದಾನವನ್ನು ಕೋರಲು ನಿರ್ಧರಿಸಿತು. ಇದರೊಂದಿಗೆ ಈ ಪ್ರದೇಶಕ್ಕೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಮಹತ್ವದ ನಿರ್ಧಾರವನ್ನು ಸಂಪುಟ ಕೈಗೊಂಡಿದೆ.

ಈ ಕ್ರಮದಿಂದ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 371 (ಜೆ) ಪರಿಚ್ಛೇದದ ಅಡಿಯಲ್ಲಿ ಪ್ರದೇಶದ ಪ್ರಗತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ವಾರ್ಷಿಕವಾಗಿ 5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುತ್ತಿದ್ದು, 2013ರಲ್ಲಿ ಸಂವಿಧಾನ ತಿದ್ದುಪಡಿ ಮೂಲಕ 371(ಜೆ) ಕಲಂ ಜಾರಿ ಮಾಡಿದ ನಂತರ ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದೇ ಒಂದು ರೂಪಾಯಿಯ ಆರ್ಥಿಕ ನೆರವು ನೀಡಿಲ್ಲ. ಹೀಗಾಗಿ ಕ್ಯಾಬಿನೆಟ್ನ ವಿನಂತಿಯ ಪ್ರಕಾರ ಈ ಪ್ರದೇಶದ ಅಭಿವೃದ್ಧಿಗೆ ಹೆಚ್ಚು ಅಗತ್ಯವಿರುವ ಹಣವನ್ನು ಕೇಂದ್ರ ಸರ್ಕಾರದಿಂದ ಪಡೆದುಕೊಳ್ಳುವ ಗುರಿಯನ್ನು ಹೊಂದಿದೆ" ಎಂದು ತಿಳಿಸಿದರು.
2013 ರಿಂದ 2018 ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ ಇಲ್ಲಿ 2014ರಲ್ಲಿ ಸಚಿವ ಸಂಪುಟ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ದೃಷ್ಟಿಯಿಂದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. 2012 ರಲ್ಲಿ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ಹೋರಾಟದಿಂದ 371 (ಜೆ) ಜಾರಿಗೆ ತರಲಾಯಿತು ಎಂದು ನೆನಪಿಸಿಕೊಂಡ ಸಿಎಂ, ವಿಶೇಷ ಸವಲತ್ತುಗಳನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ನೀಡುವ ಉದ್ದೇಶದಿಂದ 2013ರಲ್ಲಿ ಸಂವಿಧಾನ ತಿದ್ದುಪಡಿಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಈ ಕಾನೂನಿನ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ 17,439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು, 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2 ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ 890 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಹೇಳಿದರು.
ರಾಜ್ಯ ಸಚಿವ ಸಂಪುಟ ಸಭೆಯೂ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11,770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಿದೆ. ಬೀದರ್, ರಾಯಚೂರು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗಾಗಿ 7200 ಕೋಟಿ ರೂ.ಗಳ ಹಣಕಾಸು ನೆರವಿಗೆ ಅನುಮತಿ ನೀಡಲಾಗಿದೆ. ಸಭೆಯಲ್ಲಿ ಚರ್ಚಿಸಲಾದ 56 ವಿಷಯಗಳಲ್ಲಿ 46 ವಿಚಾರಗಳುಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೇರವಾಗಿ ಸಂಬಂಧಿಸಿವೆ. ಒಟ್ಟಾರೆಯಾಗಿ 12,692 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ.


Click it and Unblock the Notifications