ಮೂಲಸೌಕರ್ಯ ಯೋಜನೆಗಳನ್ನು ತ್ವರಿತಗೊಳಿಸಲು ಗಡ್ಕರಿ, ಜಾವಡೇಕರ್ ಸಭೆ
ನವದೆಹಲಿ: ದೇಶದಲ್ಲಿ ಬಾಕಿ ಇರುವ ಮೂಲಸೌಕರ್ಯ ಯೋಜನೆಗಳನ್ನು ತ್ವರಿತಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಮತ್ತು ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ 187 ಹೆದ್ದಾರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅನುಮತಿ ತೆರವು ಬಾಕಿ ಉಳಿದಿರುವ ಬಗ್ಗೆ ಪ್ರಮುಖ ಚರ್ಚೆ ನಡೆಯಿತು. ಎರಡನೇ ಹಂತ ಅರಣ್ಯ ತೆರವಿಗಾಗಿ ಅನೇಕ ಯೋಜನೆಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಇದಕ್ಕಾಗಿ ತಕ್ಷಣವೇ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಹೆದ್ದಾರಿ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅರಣ್ಯ (ಸಂರಕ್ಷಣೆ) ಕಾಯ್ದೆ 1980 ರ ಅಡಿಯಲ್ಲಿ ತಾತ್ವಿಕ ಒಪ್ಪಂದ ಮತ್ತು ಔಪಚಾರಿಕ ಅನುಮೋದನೆಯನ್ನು ಸಾಮಾನ್ಯವಾಗಿ ಹಂತ -1 ಮತ್ತು ಹಂತ- 2 ಅನುಮೋದನೆಗಳು ಎಂದು ಕರೆಯಲಾಗುತ್ತದೆ. ಸಭೆಯಲ್ಲಿ ರೈಲ್ವೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.